ಉಡುಪಿ: ಕಳೆದ ಲೋಕಸಭಾ ಚುನಾವಣೆಯಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಮೋದ್ ಮಧ್ವರಾಜ್ ಮೈತ್ರಿ ಪಕ್ಷದ ಒಡಂಬಡಿಕೆಯಂತೆ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿದರು, ನಂತರ ಶೋಭಾ ಕರಂದ್ಲಾಜೆ ವಿರುದ್ಧ ಸೋತಿದ್ದರು, ಈ ವೇಳೆ ತಾಂತ್ರಿಕ ಕಾರಣದಿಂದ ಹೊಂದಿದ್ದ ಜೆಡಿಎಸ್ ಪಕ್ಷದ ಸದಸ್ಯತ್ವಕ್ಕೆ ಗುಡ್ ಬೈ ಹೇಳಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಕೆ ಕುಮಾರಸ್ವಾಮಿಗೆ ಕಳುಹಿದ ರಾಜೀನಾಮೆ ಪತ್ರದಲ್ಲಿ ಹೀಗೆ ಉಲ್ಲೇಖಿಸಿದ್ದಾರೆ,
ಮಾನ್ಯರೇ,
ಕಳೆದ ಲೋಕಸಭಾ ಚುನಾವಣೆಯಲ್ಲಿ ಉಡುಪಿ ಹಾಗೂ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಆಕಾಂಕ್ಷಿಯಾಗಿದ್ದೆ. ಈ ವಿಷಯವನ್ನ ನಾನು ಕಾಂಗ್ರೆಸ್ ವರಿಷ್ಠರ ಗಮನಕ್ಕೂ ತಂದಿದ್ದೆ. ನಂತರ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ – ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡು , ಈ ಕ್ಷೇತ್ರವನ್ನ ಜೆಡಿಎಸ್ ಗೆ ಬಿಟ್ಟುಕೊಡಲಾಯಿತು. ನಾನು ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಜೆಡಿಎಸ್ ನಿಂದ ಸ್ಪರ್ಧಿಸಬೇಕಾಯ್ತು. ಆ ಸಂದರ್ಭದಲ್ಲಿ ನೀಡಿದ್ದ ಬಿ ಫಾರಂನಲ್ಲಿ ನಾನು ಜೆಡಿಎಸ್ ಸದಸ್ಯ ಎಂದು ನಮೂದಿಸಲಾಗಿತ್ತು. ಹಾಗೂ ಎರಡೂ ಪಕ್ಷಗಳ ಕಾರ್ಯಕರ್ತರು ಚುನಾವಣೆಯಲ್ಲಿ ಅಭೂತ ಪೂರ್ವ ಬೆಂಬಲವನ್ನೂ ನೀಡಿದರು. ಈಗ ಮೈತ್ರಿ ಇಲ್ಲವಾಗಿರೋದ್ರಿಂದ, ತಾಂತ್ರಿಕ ಕಾರಣಗಳಿಂದ ಹೊಂದಿದ್ದ ಜೆಡಿಎಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಹೀಗೆ ಪ್ರಮೋದ್ ಮಧ್ವರಾಜ್ ರಾಜೀನಾಮೆ ಪತ್ರ ರವಾನಿಸಿದ್ದಾರೆ.